Menu Close

ಕರ್ನಾಟಕ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ(ತಿದ್ದುಪಡಿ) ವಿಧೇಯಕ 2024 ನ್ನು ಕೂಡಲೇ ರದ್ದುಗೊಳಿಸಿ !

ಕರ್ನಾಟಕ ದೇವಸ್ಥಾನಗಳ ಮಹಾಸಂಘದ ವತಿಯಿಂದ ನೆಲಮಂಗಲದಲ್ಲಿ ತಹಶೀಲ್ದಾರರ ಮೂಲಕ ಮಾನ್ಯ ರಾಜ್ಯಪಾಲರಿಗೆ ಮನವಿ

ನೆಲಮಂಗಲ : ಕರ್ನಾಟಕ ಸರಕಾರವು ದಿನಾಂಕ 20 ಫೆಬ್ರವರಿಯಂದು ಕರ್ನಾಟಕ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಆಧಿನಿಯಮ 1997 ರ ತಿದ್ದುಪಡಿಯನ್ನು ಕೂಡಲೇ ರದ್ದುಗೊಳಿಸಬೇಕೆಂದು ಆಗ್ರಹಿಸಿ ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ನೆಲಮಂಗಲದಲ್ಲಿ ತಹಶೀಲ್ದಾರರ ಮೂಲಕ ಮಾನ್ಯ ರಾಜ್ಯಪಾಲರಿಗೆ ಮನವಿ ನೀಡಲಾಯಿತು, ಈ ವೇಳೆ ಹಿಂದೂ ಜನಜಾಗೃತಿ ಸಮಿತಿಯ ಬೆಂಗಳೂರು ಜಿಲ್ಲಾ ಸಮನ್ವಾಯಕರಾದ ಶ್ರೀ. ಶರತ್ ಕುಮಾರ್, ನಗರಸಭೆಯ ಸದಸ್ಯರಾದ ಶ್ರೀ. ರವಿ, ಕಚೇನಹಳ್ಳಿ ಆಂಜನೇಯ ದೇವಸ್ಥಾನದ ಶ್ರೀ. ಅಣ್ಣಯ್ಯ ಸ್ವಾಮಿ, ದಾಸನಪುರದ ರಾಮಾನುಜಂ ಪೀಠದ ಉಪಾಧ್ಯಕ್ಷರಾದ ಶ್ರೀ. ಜಯರಾಮ್, ಮೇಗಲಪೇಟೆ ಶ್ರೀ ಆಂಜನೇಯ ದೇವಸ್ಥಾನದ ಟ್ರಸ್ಟಿಗಳಾದ ಶ್ರೀ. ಎನ್.ಸಿ ಜಗದೀಶ್, ಶ್ರೀ ಅಭಯ ಆಂಜನೇಯ ಸ್ವಾಮಿ ದೇವಸ್ಥಾನದ ಅರ್ಚಕರಾದ ಶ್ರೀ. ವೆಂಕಟೇಶಮೂರ್ತಿ, ಗಂಗರಪಳ್ಳಿ ಮಾರಮ್ಮ ದೇವಸ್ಥಾನದ ಟ್ರಸ್ಟಿ ಶ್ರೀ. ಜಿ.ಕೆ ರಂಗಸ್ವಾಮಿ, ಆದರ್ಶ ಗಣಪತಿ ದೇವಸ್ಥಾನದ ಟ್ರಸ್ಟಿ ಶ್ರೀ. ರಾಮಮೂರ್ತಿ ರಾವ್ ಹಾಗೂ ಶ್ರೀ ವಿಶ್ವ ಶಾಂತಿ ಆಶ್ರಮದ ಶ್ರೀ. ಲಕ್ಷ್ಮಿಕಾಂತ್ ಉಪಸ್ಥಿತರಿದ್ದರು.

ಈ ವೇಳೆ ಶ್ರೀ. ಶರತ್ ಕುಮಾರ್ ಮಾತನಾಡಿ, `ಈ ತಿದ್ದುಪಡಿಯಲ್ಲಿ ಹಲವಾರು ದೋಷಗಳಿದ್ದು, ಅವುಗಳು ದೇವಸ್ಥಾನಗಳ ಪರಂಪರೆಯ ರಕ್ಷಣೆಯ ದೃಷ್ಟಿಯಿಂದ ಅತ್ಯಂತ ಅಪಾಯಕಾರಿಯಾಗಿದೆ. ಹಾಗಾಗಿ ಈ ಕಲಂಗಳನ್ನು ರದ್ದು ಮಾಡಬೇಕು, ಕಲಂ 69 ಇ ನಲ್ಲಿ ಜಿಲ್ಲಾ ಮಟ್ಟದ ಮತ್ತು ರಾಜ್ಯ ಮಟ್ಟದ ಉನ್ನತ ಸಮಿತಿಗಳನ್ನು ರಚನೆ ಮಾಡಲಾಗಿದ್ದು, ಜಿಲ್ಲಾ ಮಟ್ಟದ ಸಮಿತಿಗೆ 9 ಜನರ ಸದಸ್ಯರ ನೇಮಕಾತಿಯ ಬಗ್ಗೆ ಉಲ್ಲೇಖ ಮಾಡಲಾಗಿದೆ. ಈ 9 ಜನರಲ್ಲಿ ಪದನಿಮಿತ್ತ ಜಿಲ್ಲಾಧಿಕಾರಿ, ಪೋಲಿಸ್ ಅಧಿಕಾರಿ, ಅರಣ್ಯ ಸಂರಕ್ಷಣಾ ಅಧಿಕಾರಿ, ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾ ಲೋಕೊಪಯೋಗಿ ಅಭಿಯಂತರರ ಹೀಗೆ 9 ಜನರ ಸಮಿತಿ ರಚನೆ ಮಾಡಲಾಗಿದೆ. ಇದೇ ರೀತಿಯಲ್ಲಿ 16 ಜನರ ರಾಜ್ಯ ಮಟ್ಟದ ಸಮಿತಿಯನ್ನು ರಚನೆ ಮಾಡಲಾಗಿದ್ದು, ಅದರಲ್ಲಿ ಸ್ಥಳೀಯ ಶಾಸಕರು, ಸಂಸದರು ಸೇರಿ ವಿವಿಧ ಇಲಾಖೆಗಳ ಕಾರ್ಯದರ್ಶಿಗಳನ್ನು ಸಮಿತಿ ಸದಸ್ಯರನ್ನಾಗಿ ಮಾಡಲಾಗಿದೆ. ಇದರಲ್ಲಿ ಹಿಂದೂಗಳಲ್ಲದವರು ಇರುವ ಸಾಧ್ಯತೆ ಇರುವ ಕಾರಣದಿಂದ ಇದು ಅತ್ಯಂತ ಅಪಾಯಕಾರಿಯಾಗಿದೆ ಮತ್ತು ಅಲ್ಲಿಯೂ ಭ್ರಷ್ಟಚಾರವು ತಾಂಡವಾಡಲಿದೆ. ಕಲಂ 19 ರಲ್ಲಿ ಸಾಮಾನ್ಯ ಸಂಗ್ರಹಣ ನಿಧಿಯ ಉಲ್ಲೇಖ ಮಾಡಲಾಗಿದೆ. ಈ ನಿಧಿಯನ್ನು ‘ಇತರ ಯಾವುದೇ ಧಾರ್ಮಿಕ ಸಂಸ್ಥೆಗಳಿಗೆ ನೀಡುವ ಬಗ್ಗೆ ಉಲ್ಲೇಖ ಮಾಡಲಾಗಿದೆ. ಇದು ಮುಂದಿನ ದಿನಗಳಲ್ಲಿ ಅನ್ಯಮತೀಯರಿಗೂ ಸಹ ಅನ್ವಯ ಮಾಡಲಾಗುವ ಸಾದ್ಯತೆ ಇದೆ. ಇದು ಮುಂದಿನ ದಿನಗಳಲ್ಲಿ ಅನ್ಯ ಸಮುದಾಯದವರಿಗೂ ಸಹ ಹಿಂದೂ ದೇವಸ್ಥಾನಗಳ ಹಣ ನೀಡುವ ಸಾಧ್ಯತೆ ಇದೆ. ಕಲಂ 25 ರಲ್ಲಿ ಸಂಯೋಜಿತ ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿಯ ರಚನೆ ಸಂದರ್ಭದಲ್ಲಿ ಹಿಂದೂಗಳಲ್ಲದವರನ್ನು ನೇಮಕ ಮಾಡುವ ಬಗ್ಗೆ ಉಲ್ಲೇಖ ಮಾಡಲಾಗಿದೆ. ಇದು ದೇವಸ್ಥಾನಗಳ ಪರಂಪರೆ ರಕ್ಷಣೆಯ ವಿಷಯದಲ್ಲಿ ಅತ್ಯಂತ ಅಪಾಯಕಾರಿಯಾಗಿದೆ. ಕಲಂ 17 ರಲ್ಲಿ ಯಾವ ಸಂಸ್ಥೆಗಳ ಆದಾಯ 1 ಕೋಟಿ ಮೀರಿರುವುದೋ ಅವುಗಳ 10% ನಿವ್ವಳ ಆದಾಯದ ಪ್ರತಿಶತ್ ಹಣವನ್ನು 5 ರಿಂದ 10 ಲಕ್ಷ ಇರುವ ಆದಾಯ ಇರುವ ದೇವಸ್ಥಾನಗಳ 5 ಶೇ ಹಣವನ್ನು ಸಾಮಾನ್ಯ ಸಂಗ್ರಹಣ ನಿಧಿಗೆ ವರ್ಗಾವಣೆ ಮಾಡುವ ಬಗ್ಗೆ ಉಲ್ಲೇಖ ಮಾಡಲಾಗಿದೆ. ಇದು ದೇವಸ್ಥಾನಗಳ ಹಣವನ್ನು ದೋಚುವ ಹುನ್ನಾರವಾಗಿದೆ. ಈ ಎಲ್ಲ ಕಲಂಗಳು ದೇವಸ್ಥಾನಗಳ ಸಂರಕ್ಷಣೆ ದೃಷ್ಟಿಯಿಂದ ಅತ್ಯಂತ ಮಾರಕವಿರುವುದರಿಂದ ಇದಕ್ಕೆ ಅವಕಾಶ ನೀಡಬಾರದು’ ಎಂದು ಒತ್ತಾಯಿಸಿದ್ದಾರೆ.

Related News